ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು, ಸಂಬಂಧಪಟ್ಟವರು ಸೂಕ್ತ ಮಾಹಿತಿಯೊಂದಿಗೆ ಪ್ರಕರಣ ದಾಖಲಿಸಿದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಎಸ್ಪಿ ಉಮಾ ಪ್ರಶಾಂತ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಎಸ್ಪಿ ಉಮಾ ಪ್ರಶಾಂತ್
ದಾವಣಗೆರೆ (ತಾರಿಕ್ ನಕಾಶ್ | ಇಂಡೋ ಟೈಮ್ಸ್ ಮೀಡಿಯಾ ) ಮಾ.07:
ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ನೆರವಾವಾಗಿ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ“ ಕುಂದು ಕೊರತೆ ಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ವಿವಿಧ ರೀತಿಯ ದುಶ್ಚಟಗಳಿಗೆ ಹಾಗೂ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಅಂತಹ ಮಕ್ಕಳಿಗೆ ಅದರಿಂದಾಗುವ ದುಷ್ಪರಿಣಾಮಗಳ ಕುರಿತು ಮತ್ತಷ್ಟು ಜಾಗೃತಿ ಮೂಡಿಸುವುದರೊಂದಿಗೆ ಶಿಕ್ಷಣದ ಮಹತ್ವ ತಿಳಿಸಬೇಕು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು, ಸಂಬಂಧಪಟ್ಟವರು ಸೂಕ್ತ ಮಾಹಿತಿಯೊಂದಿಗೆ ಪ್ರಕರಣ ದಾಖಲಿಸಿದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೇ ಈ ಕುರಿತು ಮತ್ತಷ್ಟು ಅರಿವು ಮೂಡಿಸಲಾಗುವುದು. ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ ದಲಿತ ಮುಖಂಡರು ಕೇಳಿದ ಪ್ರಶ್ನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಿ, ಪ್ರತಿಯೊಬ್ಬ ನಾಗರೀಕನಿಗೂ ಸಮಾನ ನ್ಯಾಯ ದೊರಕಿಸುವುದೇ ಈ ಸಭೆಯ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ್, ವಿಜಯ್ ಕುಮಾರ್ ಎನ್.ಸಂತೋಷ್, ಅಬಕಾರಿ ಉಪ ಆಯುಕ್ತ ಸಿ.ಎನ್.ಜುನೈ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ದಲಿತ ಸಂಘಟನೆಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.